Honorable Chief Minister | Government of Karnataka
Shri G T DeveGowda
Honorable MLA and President
ಶ್ರೀ ಜಿ.ಟಿ. ದೇವೇಗೌಡ ಅವರು ಮೈಸೂರು ಜಿಲ್ಲೆಯ ಇಲವಾಲ ಹೋಬಳಿಯ ಗುಂಗ್ರಾಲ್ ಛತ್ರ ಗ್ರಾಮದ ಗೌರವಾನ್ವಿತ ರೈತ ಕುಟುಂಬದವರಾಗಿದ್ದು, ಸ್ವತಃ ಪ್ರಗತಿಪರ ಕೃಷಿಕರಾಗಿದ್ದಾರೆ. 1965ರಿಂದ ಕೃಷಿ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕೃಷಿ ಹಾಗೂ ಸಹಕಾರ ಚಳುವಳಿಯ ಬೆಳವಣಿಗೆಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. 1970ರಲ್ಲಿ ಗುಂಗ್ರಾಳ್ಛತ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸಹಕಾರ ಕ್ಷೇತ್ರಕ್ಕೆ ಪ್ರವೇಶಿಸಿದ ಅವರು, ಕಳೆದ 50ಕ್ಕೂ ಹೆಚ್ಚು ವರ್ಷಗಳಿಂದ ಸಹಕಾರ ಚಳುವಳಿಯ ಅಭ್ಯುದಯಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ.
1982 ರಲ್ಲಿ ಅದೇ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದರು. ನಂತರ 1983ರಲ್ಲಿ ಮೈಸೂರು ತಾಲ್ಲೂಕು ಕೃಷಿ ಮಾರುಕಟ್ಟೆ ಸಮಿತಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿ, ಹಿರಿಯ ಸಹಕಾರಿ ಆರ್.ಎಲ್. ಜಾಲಪ್ಪ ಅವರೊಂದಿಗೆ ಸೇರಿ ತರಕಾರಿ ನಿಯಂತ್ರಣ ಕಾಯ್ದೆ ಜಾರಿಗೆ ಮಹತ್ವದ ಹೋರಾಟ ನಡೆಸಿದರು. 1986ರಲ್ಲಿ ಭೂ ಅಭಿವೃದ್ಧಿ ಬ್ಯಾಂಕ್ ಹಾಗೂ ಮಾರಾಟ ಸಹಕಾರ ಸಂಘಗಳ ನಿರ್ದೇಶಕರಾಗಿ, 1992ರಲ್ಲಿ ಮೈಸೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ ಹಾಗೂ ಮೈಸೂರು ಜಿಲ್ಲಾ ಸಹಕಾರ ಯೂನಿಯನ್ನ ನಿರ್ದೇಶಕರಾಗಿ ಮತ್ತು ಅಧ್ಯಕ್ಷರಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದರು.
1994 ರಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರಾಗಿ ಆಯ್ಕೆಯಾದ ಅವರು, ಮುಂದಿನ ವರ್ಷವೇ ಮಹಾಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿ 23 ವರ್ಷಗಳ ಕಾಲ ನಿರಂತರವಾಗಿ ಸಂಸ್ಥೆಯನ್ನು ಮುನ್ನಡೆಸಿದರು. ಇದೇ ಅವಧಿಯಲ್ಲಿ ರಾಷ್ಟ್ರೀಯ ಸಹಕಾರಿ ಯೂನಿಯನ್ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದರು. 2006ರಿಂದ 2013ರವರೆಗೆ ಕರ್ನಾಟಕ ರಾಜ್ಯ ವಿಮಾ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಮಾರ್ಗದರ್ಶನ ನೀಡಿದರು. 2021ರಿಂದ ಪುನಃ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಆಯ್ಕೆಯಾಗಿ ಸಮರ್ಥ ನಾಯಕತ್ವದೊಂದಿಗೆ ಸೇವೆ ಸಲ್ಲಿಸುತ್ತಿದ್ದಾರೆ.
ಶ್ರೀ ಜಿ.ಟಿ. ದೇವೇಗೌಡ ಅವರ ರಾಜಕೀಯ ಹಾಗೂ ಸಾರ್ವಜನಿಕ ಸೇವೆಯೂ ಗಮನಾರ್ಹವಾಗಿದೆ. ಅವರು ಐದು ಬಾರಿ ಶಾಸಕರಾಗಿ ಹಾಗೂ ಎರಡು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಸಹಕಾರ ಸಚಿವರಾಗಿ ಮತ್ತು ಉನ್ನತ ಶಿಕ್ಷಣ ಸಚಿವರಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. 2008ರಲ್ಲಿ ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರಾಗಿ ನೇಮಕಗೊಂಡು ಗಮನಾರ್ಹ ಸೇವೆ ಸಲ್ಲಿಸಿದರು. ''ಅತ್ಯುತ್ತಮ ಕಾರ್ಯದರ್ಶಿ'' ಪ್ರಶಸ್ತಿಯಿಂದ ಹಿಡಿದು ಕ್ರಿಬ್ಕೋ ಸಂಸ್ಥೆಯ ''ಸಹಕಾರಿ ರತ್ನ ಸಮ್ಮಾನ್'' ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಪ್ರಸ್ತುತ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ರಾಜ್ಯದ ಸಹಕಾರ ಚಳುವಳಿಗೆ ದಕ್ಷ ನಾಯಕತ್ವ ಹಾಗೂ ಮಾರ್ಗದರ್ಶನ ನೀಡುತ್ತಾ ಸೇವೆ ಸಲ್ಲಿಸುತ್ತಿದ್ದಾರೆ.